﻿ಯೆರೆಮೀಯ.
1.
ಇವು ಯೆರೆಮೀಯನ ಸಂದೇಶಗಳು. ಯೆರೆಮೀಯನು ಹಿಲ್ಕೀಯನೆಂಬುವನ ಮಗನು. ಯೆರೆಮೀಯನು ಅನಾತೋತ್ ನಗರದ ಯಾಜಕ ಕುಟುಂಬಕ್ಕೆ ಸೇರಿದವನಾಗಿದ್ದನು. ಆ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿತ್ತು. 
ಯೆಹೂದದಲ್ಲಿ ಆಮೋನನ ಮಗನಾದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನೊಂದಿಗೆ ಮಾತನಾಡಲು ಪ್ರಾರಂಭಿಸಿದನು. 
ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು. 
ಯೆರೆಮೀಯನಿಗೆ ಯೆಹೋವನ ಈ ಸಂದೇಶ ಬಂದಿತು: 
“ನಾನು ನಿನ್ನನ್ನು ನಿನ್ನ ತಾಯಿಯ ಗರ್ಭದಲ್ಲಿ ರೂಪಿಸುವ ಮುಂಚೆಯೇ ನಿನ್ನನ್ನು ಬಲ್ಲವನಾಗಿದ್ದೆನು. ನೀನು ಹುಟ್ಟುವದಕ್ಕಿಂತ ಮುಂಚೆಯೇ ನಾನು ನಿನ್ನನ್ನು ಒಂದು ವಿಶೇಷವಾದ ಕೆಲಸಕ್ಕೆ ಅಂದರೆ ಜನಾಂಗಗಳಿಗೆ ಪ್ರವಾದಿಯನ್ನಾಗಿ ಆರಿಸಿಕೊಂಡಿದ್ದೆನು.” 
ಆಗ ಯೆರೆಮೀಯನೆಂಬ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಬೇಕೆಂಬುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ. 
ಆದರೆ ಯೆಹೋವನು ನನಗೆ, “ನಾನು ಕೇವಲ ಹುಡುಗನೆಂದು ಹೇಳಬೇಡ, ನಾನು ಕಳುಹಿಸುವ ಸ್ಥಳಗಳಿಗೆ ನೀನು ಹೋಗಬೇಕು. ನಾನು ಹೇಳು ಅಂದದ್ದನ್ನೆಲ್ಲ ನೀನು ಹೇಳಬೇಕು. 
ಯಾರಿಗೂ ನೀನು ಹೆದರಬೇಡ, ನಾನೇ ನಿನ್ನ ಜೊತೆ ಇದ್ದೇನೆ. ನಾನು ನಿನ್ನನ್ನು ಕಾಪಾಡುತ್ತೇನೆ. ಈ ಮಾತನ್ನು ಯೆಹೋವನಾದ ನಾನೇ ಹೇಳುತ್ತಿದ್ದೇನೆ” ಎಂದನು. 
ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ. 
ಕಿತ್ತುಹಾಕಲು, ಕೆಡವಲು, ನಾಶಪಡಿಸಲು, ಹಾಳುಮಾಡಲು, ಕಟ್ಟಲು, ನೆಡಲು, ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು. 
ಯೆಹೋವನಿಂದ ನನಗೆ ಈ ಸಂದೇಶ ಬಂದಿತು: “ಯೆರೆಮೀಯನೇ, ನಿನಗೆ ಏನು ಕಾಣುತ್ತಿದೆ?” ಎಂದು ಯೆಹೋವನು ಕೇಳಿದನು. ನಾನು ಆತನಿಗೆ, “ಬಾದಾಮಿಯ ಮರದಿಂದ ಮಾಡಿದ ಒಂದು ದಂಡ ಕಾಣಿಸುತ್ತಿದೆ” ಎಂದು ಉತ್ತರಕೊಟ್ಟೆನು. 
ಆಗ ಯೆಹೋವನು, “ನೀನು ಸರಿಯಾಗಿ ನೋಡಿರುವೆ, ನನ್ನ ಮಾತನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆ” ಎಂದು ತಿಳಿದುಕೊ ಎಂಬುದಾಗಿ ಹೇಳಿದನು. 
ಇನ್ನೊಂದು ಸಲ ಯೆಹೋವನು, “ನಿನಗೆ ಏನು ಕಾಣುತ್ತಿದೆ?” ಎಂದು ಕೇಳಿದನು. ನಾನು ಯೆಹೋವನಿಗೆ, “ಕುದಿಯುವ ನೀರಿನ ಒಂದು ಹಂಡೆ ಕಾಣುತ್ತಿದೆ. ಆ ಹಂಡೆಯು ಉತ್ತರದಿಂದ ಈ ಕಡೆಗೆ ಬಾಗಿಕೊಂಡಿದೆ” ಎಂದು ಉತ್ತರಿಸಿದೆನು. 
ಯೆಹೋವನು ನನಗೆ, “ಉತ್ತರ ದಿಕ್ಕಿನಿಂದ ಈ ದೇಶದ ನಿವಾಸಿಗಳೆಲ್ಲರ ಮೇಲೆ ಒಂದು ಕೇಡು ಬರುವದು. 
ಸ್ವಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನ್ನು ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಬರುವರು. ಅವರು ಜೆರುಸಲೇಮಿನ ಹೆಬ್ಬಾಗಿಲಿನ ಹತ್ತಿರ ತಮ್ಮ ಆಸನಗಳನ್ನು ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು. 
ನಾನು ನನ್ನ ಜನರ ವಿರುದ್ಧ ನನ್ನ ನ್ಯಾಯನಿರ್ಣಯವನ್ನು ಘೋಷಿಸುವೆನು. ಅವರು ಕೆಟ್ಟ ಜನರು, ಅವರು ನನ್ನ ವಿರೋಧಿಗಳಾಗಿದ್ದಾರೆ. ನನ್ನ ಜನರು ನನ್ನನ್ನು ತ್ಯಜಿಸಿದ್ದಾರೆ. ಅವರು ನನ್ನನ್ನು ಹೇಗೆ ತ್ಯಜಿಸಿದರು? ಅವರು ಅನ್ಯದೇವರುಗಳಿಗೆ ಹೋಮ ಮಾಡಿದರು. ಅವರು ತಮ್ಮ ಕೈಗಳಿಂದಲೇ ಮಾಡಿದ ವಿಗ್ರಹಗಳನ್ನು ಪೂಜಿಸಿದರು. 
“ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು. 
ಇಗೋ, ನೀನು ನನ್ನ ವಿಷಯವಾಗಿ ಹೇಳಬೇಕು. ನಾನು ನಿನ್ನನ್ನು ಭದ್ರವಾದ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ಕಂಚಿನ ಗೋಡೆಯನ್ನಾಗಿಯೂ ಮಾಡುತ್ತೇನೆ. ನೀನು ದೇಶದಲ್ಲಿ ಎಲ್ಲರಿಗೂ ಎದುರಾಗಿ ನಿಲ್ಲಬಹುದು, ಯೆಹೂದ ದೇಶದ ರಾಜರ ವಿರುದ್ಧವಾಗಿಯೂ ಯೆಹೂದದ ನಾಯಕರ ವಿರುದ್ಧವಾಗಿಯೂ ಯೆಹೂದದ ಯಾಜಕರ ವಿರುದ್ಧವಾಗಿಯೂ ಯೆಹೂದದೇಶದ ಜನರ ವಿರುದ್ಧವಾಗಿಯೂ ನೀನು ನಿಲ್ಲುವೆ. 
ಆ ಜನರೆಲ್ಲಾ ನಿನ್ನ ವಿರುದ್ಧ ಹೋರಾಡುವರು, ಆದರೆ ಅವರು ನಿನ್ನನ್ನು ಸೋಲಿಸಲಾಗುವುದಿಲ್ಲ. ಏಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಾನೇ ನಿನ್ನನ್ನು ರಕ್ಷಿಸುವೆನು.” ಇದು ಯೆಹೋವನಾದ ನನ್ನ ಮಾತು. 
