﻿ಕೀರ್ತ.
118.
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ. 
ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 
ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 
ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 
ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು. 
ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು? 
ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು. 
ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. 
ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. 
ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಬಲದಿಂದ ಅವರನ್ನು ಸಂಹರಿಸುವೆನು. 
ಅವರು ನನ್ನನ್ನು ಸುತ್ತಲೂ ಮುತ್ತಿದರು; ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು. 
ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು. 
ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ; ಆದರೆ ಯೆಹೋವನು ನನಗೆ ಸಹಾಯ ಮಾಡಿದನು. 
ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು. 
ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. 
ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. 
ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು. 
ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ. 
ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು. 
ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ. 
ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ. 
ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು; 
ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ. 
ಈ ದಿನವು ಯೆಹೋವನಿಂದಲೇ ನೇಮಕವಾದದ್ದು; ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ. 
ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು. 
ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ. 
ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ. 
ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ. 
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು. 
